Friday 31 October 2014

ಸಾಲ ಸೌಲಭ್ಯ ಸದ್ಬಳಕೆ ಮಾಡಿಕೊಳ್ಳಲು ಕರೆ

                              ಸಾಲ ಸೌಲಭ್ಯ ಸದ್ಬಳಕೆ ಮಾಡಿಕೊಳ್ಳಲು ಕರೆ
ಮಂಡ್ಯ,- ಮಹಿಳೆಯರು ಸಂಘ-ಸಂಸ್ಥೆಗಳ ಸಾಲ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಂಡು ಆರ್ಥಿಕ ಸಬಲರಾಗಬೇಕು ಎಂದು ತಹಸೀಲ್ದಾರ್ ಪ್ರಿಯದರ್ಶಿನಿ ಹೇಳಿದರು.
ಇಂದು ತಾಲ್ಲೂಕಿನ ಎ.ಹುಲ್ಲುಕೆರೆ ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಗತಿ ಬಂಧು/ಸ್ವಸಹಾಯ ಸಂಘಗಳ ನೂತನ ಒಕ್ಕೂಟ ಹಾಗೂ ಐಸಿರಿ ಮಹಿಳಾ ಜ್ಞಾನ ವಿಕಾಸ ಕೇಂದ್ರ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.
ಸಾಲಗಳನ್ನು ಸರಿಯಾದ ರೀತಿಯಲ್ಲಿ ಸದ್ಬಳಕೆ ಮಾಡಿಕೊಂಡು, ಸಾಲವನ್ನು ಮರುಪಾವತಿಸಿ ಸಂಘದ ಅಭಿವೃದ್ಧಿಗೆ ಸಹಕರಿಸಬೇಕು. ನೀವುಗಳು ಸಹ ಆರ್ಥಿಕವಾಗಿ ಅಭಿವೃದ್ಧಿ ಹೊಂದಲು ಸ್ವಯಂ ಉದ್ಯೋಗವನ್ನು ಕಂಡು ಕೊಳ್ಳಬೇಕು ಎಂದು ಸಲಹೆ ನೀಡಿದರು.
ನಮ್ಮಲ್ಲಿ ಆಗಬಹುದಾದ ಕೆಲಸಗಳಿಗೆ ಕಾನೂನು ವ್ಯಾಪ್ತಿಯಲ್ಲಿ ಹಾಗೂ ಊರಿನ ಅಭಿವೃದ್ಧಿಗಾಗಿ ಸಹಕಾರ ನೀಡಲಾಗುವುದು ಎಂದು ತಿಳಿಸಿದರು.
ನಂತರ ಕಾರ್ಯಕ್ರಮವನ್ನು ಉದ್ಘಾಟಿಸಿದ ಕೆಪಿಸಿಸಿ ಸದಸ್ಯ ಸಚ್ಚಿದಾನಂದ ಮಾತನಾಡಿ, ಸಾಲದ ಹಣವನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಸಂಘದಿಂದ ಅಭಿವೃದ್ಧಿ ಹೊಂದಿ ಬೇರೆಯವರಿಗೆ ಮಾದರಿಯಾಗಿರಬೇಕು. ಅದೇ ರೀತಿ ಮಾರ್ಗದರ್ಶಕರಾಗಿ ಮುಂದುವರೆಯಬೇಕು ಎಂದು ಹೇಳಿದರು.
ಸಂಘ-ಸಂಸ್ಥೆಗಳ ನೆರವಿನೊಂದಿಗೆ ಗ್ರಾಮಗಳ ಸ್ವಚ್ಛತಾ ನೈರ್ಮಲ್ಯ ಕಾಪಾಡುವುದರಿಂದ ಆರೋಗ್ಯ ವೃದ್ಧಿಯಾಗುತ್ತದೆ. ಇದರಿಂದ ಉತ್ತಮ ಸಮಾಜ ನಿರ್ಮಾಣ ಮಾಡಲು ಸಾಧ್ಯವಾಗುತ್ತದೆ ಎಂದು ಕಿವಿಮಾತು ಹೇಳಿದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಗ್ರಾಮಗಳ ಅಭಿವೃದ್ಧಿಗೆ ಅನೇಕ ಯೋಜನೆಗಳನ್ನು ಹಮ್ಮಿಕೊಂಡಿದೆ. ಇವುಗಳನ್ನು ಗ್ರಾಮಸ್ಥರು ಬಳಸಿಕೊಂಡು ಮಾದರಿ ಗ್ರಾಮ ಮಾಡಲು ಒಗ್ಗಟ್ಟಿನಿಂದ ಎಲ್ಲರೂ ಪಣತೊಡಬೇಕು ಎಂದು ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ಬೇವಿನಹಳ್ಳಿ ಗ್ರಾ.ಪಂ. ಅಧ್ಯಕ್ಷ ಮಹೇಶ್, ತಾ.ಪಂ. ಸದಸ್ಯ ರೇವಣ್ಣ, ನಾಗರತ್ನಮ್ಮ, ಸಿ.ಮಹದೇವು, ಅಂದಾನಿಗೌಡ, ಸಂಪತ್‍ಕುಮಾರ್, ಮೇಲ್ವಿಚಾರಕ ಮಹೇಶ್, ಸುನೀತಾ.ಕೆ.ಎಸ್, ಎಸ್‍ಡಿಎಂಸಿ ಅಧ್ಯಕ್ಷ ಗಣೇಶ್ ಸೇರಿದಂತೆ 25ಕ್ಕೂ ಮಹಿಳಾ  ಸ್ವಸಹಾಯ ಸಂಘಗಳ ಮಹಿಳೆಯರು ಭಾಗವಹಿಸಿದ್ದರು.

No comments:

Post a Comment