Saturday 4 April 2015

 ಪ್ರಗತಿ ಪರಿಶೀಲನಾ ಸಭೆ
     ಮೈಸೂರು,ಏ.04.ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (20 ಅಂಶಗಳ ಕಾರ್ಯಕ್ರಮಗಳು ಸೇರಿದಂತೆ) 2015ನೇ ಫೆಬ್ರವರಿ  ಮಾಹೆಯ ಅಂತ್ಯಕ್ಕೆ ಸಾಧಿಸಿದ ಪ್ರಗತಿ ಪರಿಶೀಲನಾ ಸಭೆ ಜಿಲ್ಲಾ ಪಂಚಾಯತ್ ಅಧ್ಯಕ್ಷರ ಅಧ್ಯಕ್ಷತೆಯಲ್ಲಿ ಏಪ್ರಿಲ್ 15 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ.
ಏ. 5 ರಂದು ಬಾಬು ಜಗಜೀವನ ರಾಂ ಅವರ 108ನೇ ಜನ್ಮ ದಿನಾಚರಣೆ
     ಮೈಸೂರು,ಏ.04.ಜಿಲ್ಲಾಡಳಿತದ ವತಿಯಿಂದ ಏಪ್ರಿಲ್ 5 ರಂದು ಹಸಿರು ಕ್ರಾಂತಿ ಹರಿಕಾರ, ಭಾರತ ಮಾಜಿ ಉಪಪ್ರಧಾನಿ ಡಾ|| ಬಾಬು ಜಗಜೀವನ ರಾಂ ಅವರ 108ನೇ ಜನ್ಮ ದಿನ ಆಚರಿಸಲಾಗುವುದು.
     ಅಂದು ಬೆಳಿಗ್ಗೆ 9-30 ಗಂಟೆಗೆ ರೈಲ್ವೆ ನಿಲ್ದಾಣದ ಬಳಿ ಇರುವ  ಡಾ|| ಬಾಬು ಜಗಜೀವನ ರಾಂ ಅವರ    ಪ್ರತಿಮೆಗೆ ಮಾರ್ಲಾಪಣೆ ಮಾಡಿದ ನಂತರ 10 ಗಂಟೆಗೆ ಮೈಸೂರು ಮಹಾನಗರ ಪಾಲಿಕೆ ಮಹಾಪೌರರಾದ ಆರ್. ಲಿಂಗಪ್ಪ ಅವರು ಮೆರವಣಿಗೆಗೆ ಚಾಲನೆ ನೀಡುವರು. ಮೆರವಣಿಗೆಯು ರೈಲ್ವೆ ನಿಲ್ದಾಣದಿಂದ ಹೊರಟು ಮೆಟ್ರೋಪೋಲ್ ವೃತ್ತದ ಮೂಲಕ ಹುಣಸೂರು ರಸ್ತೆ ಮಾರ್ಗವಾಗಿ ಕಲಾಮಂದಿರ ತಲುಪಲಿದೆ.
     ಬೆಳಿಗ್ಗೆ 11 ಗಂಟೆಗೆ ಕಲಾಮಂದಿರದಲ್ಲಿ ನಡೆಯಲಿರುವ ಸಭಾ ಕಾರ್ಯಕ್ರಮವನ್ನು ಕಂದಾಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿ.ಶ್ರೀನಿವಾಸಪ್ರಸಾದ್ ಅವರು ಉದ್ಘಾಟಿಸುವರು. ಶಾಸಕ ವಾಸು ಅವರು ಅಧ್ಯಕ್ಷತೆ ವಹಿಸುವರು.  ಮೈಸೂರು ವಿಶ್ವವಿದ್ಯಾನಿಲಯದ ವಿಶ್ರಾಂತ ಪ್ರಾಧ್ಯಾಪಕ ಡಾ|| ಲಕ್ಷ್ಮಿನಾರಾಯಣ ಅರೋರಾ ಅವರು ಮುಖ್ಯ ಭಾಷಣಕಾರರಾಗಿ ಭಾಗವಹಿಸಲಿದ್ದಾರೆ.
     ಲೋಕೋಪಯೋಗಿ ಸಚಿವ ಡಾ|| ಹೆಚ್.ಸಿ. ಮಹದೇವಪ್ಪ, ಮೈಸೂರು ಮಹಾನಗರ ಪಾಲಿಕೆ ಮಹಾಪೌರರಾದ ಆರ್. ಲಿಂಗಪ್ಪ, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಡಾ|| ಬಿ. ಪುಷ್ಪಾ ಅಮರನಾಥ್,  ಲೋಕಸಭಾ ಸದಸ್ಯರುಗಳಾದ ಪ್ರತಾಪಸಿಂಹ, ಆರ್. ಧ್ರುವನಾರಾಯಣ್, ಸಿ.ಎಸ್. ಪುಟ್ಟರಾಜು, ವಿಧಾನಸಭಾ ಸದಸ್ಯರುಗಳಾದ ತನ್ವೀರ್ ಸೇಠ್, ಜಿ.ಟಿ. ದೇವೇಗೌಡ, ಕೆ. ವೆಂಕಟೇಶ್, ಹೆಚ್.ಸಿ.ಮಂಜುನಾಥ್, ಸಾ.ರಾ. ಮಹೇಶ್, ಚಿಕ್ಕಮಾದು, ಎಂ.ಕೆ. ಸೋಮಶೇಖರ್, ವಾಸು, ವಿಧಾನ ಪರಿಷತ್ ಸದಸ್ಯರಾದ ಸಿ.ಹೆಚ್. ವಿಜಯಶಂಕರ್, ಗೋ. ಮಧುಸೂಧನ್, ಮರಿತಿಬ್ಬೇಗೌಡ, ಎಸ್. ನಾಗರಾಜು, ಆರ್. ಧರ್ಮಸೇನ, ಕರ್ನಾಟಕ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ನಾರಾಯಣ, ಕಾವೇರಿ ಪ್ರದೇಶಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಸಿ. ದಾಸೇಗೌಡ, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ.ಆರ್. ಮೋಹನ್‍ಕುಮಾರ್, ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಆರ್. ಮೂರ್ತಿ, ಬಣ್ಣ ಮತ್ತು ಅರಗು ಕಾರ್ಖಾನೆ ಅಧ್ಯಕ್ಷ ಅನಂತು, ಕರ್ನಾಟಕ ಮೃಗಾಲಯ ಪ್ರಾಧಿಕಾರದ ಅಧ್ಯಕ್ಷೆ ರೀಹಾನಬಾನು, ಮೈಸೂರು ಮಹಾನಗರ ಪಾಲಿಕೆ ಉಪ ಮಹಾಪೌರರು ಎಂ. ಮಹದೇವಮ್ಮ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷ ಎಲ್. ಮಾದಪ್ಪ, ತಾಲ್ಲೂಕು ಪಂಚಾಯತ್ ಅಧ್ಯಕ್ಷ ಜಿ. ಕುಮಾರ್, ಉಪಾಧ್ಯಕ್ಷೆ ಲೋಕಾಮಣಿ ಹಾಗೂ ಇನ್ನಿತರ ಗಣ್ಯರು ಭಾಗವಹಿಸುವರು.
ಭಾಗವಹಿಸುವಿಕೆ ಕಡ್ಡಾಯ:
      ರಾಜ್ಯ ಸರ್ಕಾರದ ಎಲ್ಲಾ ಅಧಿಕಾರಿಗಳು/ ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಕಡ್ಡಾಯವಾಗಿ ಭಾಗವಹಿಸುವಂತೆ ಸೂಚಿಸಿರುವ ಜಿಲ್ಲಾಧಿಕಾರಿಗಳು ಸಾರ್ವಜನಿಕರು ಹಾಗೂ ಸಂಘ ಸಂಸ್ಥೆಯವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ  ಕೋರಿದ್ದಾರೆ.

ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಚಾರ ವಾಹನಕ್ಕೆ ಚಾಲನೆ


 ಮೈಸೂರು,ಏ.04-ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಬಗ್ಗೆ ಅರಿವು ಮೂಡಿಸಲು ಜಿಲ್ಲೆಯಾದ್ಯಂತ ಪ್ರವಾಸ ಕೈಗೊಂಡಿರುವ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಪ್ರಚಾರ ವಾಹನಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಕಂದಾಯ ಸಚಿವ ವಿ.ಶ್ರೀನಿವಾಸ್ ಪ್ರಸಾದ್ ಅವರು ಶುಭ ಹಾರೈಸಿ ಬೀಳ್ಕೊಟ್ಟರು.
     ರಾಣಿ ಬಹದ್ದೂರ್ ಸಭಾಂಗಣದಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕುರಿತ ಸಮಾರಂಭದಲ್ಲಿ ಪಾಲ್ಗೊಂಡಿದ್ದ ಸಚಿವರು ಪ್ರಚಾರ ವಾಹನವನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ವಾಹನವು ಜಿಲ್ಲೆಯ ಎಲ್ಲ ತಾಲ್ಲೂಕುಗಳು ಎಲ್ಲಾ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸಂಚರಿಸಿ ಜನರಲ್ಲಿ ಜಾಗೃತಿ ಮೂಡಿಸಲಿ ಎಂದು ಆಶಿಸಿದರು.
   ಇದಕ್ಕೂ ಮುನ್ನ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ವಾಹನವನ್ನು ಬೀಳ್ಕೊಟ್ಟ ಹೆಚ್ಚುವರಿ ಜಿಲ್ಲಾಧಿಕಾರಿ ಹಾಗೂ ಪ್ರಭಾರ ಜಿಲ್ಲಾಧಿಕಾರಿ ಶ್ರೀಮತಿ ಅರ್ಚನಾ ಅವರು ಸಮೀಕ್ಷೆ ಕುರಿತು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹೊರ ತಂದಿರುವ ಕರಪತ್ರಗಳನ್ನು ಸಾರ್ವಜನಿಕರಿಗೆ ಸಾಂಕೇತಿಕವಾಗಿ ವಿತರಿಸಿ ಸಮೀಕ್ಷೆಯಲ್ಲಿ ಸಾರ್ವಜನಿಕರು ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದರು.
   2015ರ ಏಪ್ರಿಲ್ 11 ರಿಂದ 30 ರವರೆಗೆ ನಡೆಯಲಿರುವ ಸಮೀಕ್ಷೆಯಲ್ಲಿ ಸಾರ್ವಜನಿಕರು ನಿಖರ ಮಾಹಿತಿ ನೀಡಬೇಕು, ಸಮೀಕ್ಷೆಯಲ್ಲಿ ಸಂಗ್ರಹಿಸುವ ಅಂಕಿ ಅಂಶಗಳು ಮುಂದೆ ಆಯಾ ಜಾತಿ ವರ್ಗಗಳ ಹಿಂದುಳಿದಿರುವಿಕೆ ಗುರುತಿಸುವಲ್ಲಿ ಹಾಗೂ ಯೋಜನೆಗಳನ್ನು ರೂಪಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ ಎಂದರು.
     ವಿಭಿನ್ನ ಸ್ಥಳಗಳಲ್ಲಿ ವಾಸವಾಗಿರುವ ಅಥವಾ ಬೇರೆ ಬೇರೆ ವೃತ್ತಿಗಳಲ್ಲಿ ತೊಡಗಿರುವ ವ್ಯಕ್ತಿಗಳು ಹಾಗೂ ಜನಸಮೂಹಗಳಿಗೆ ಆರ್ಥಿಕ ಅಸಮಾನತೆ ಕಡಿಮೆ ಮಾಡಲು ಮತ್ತು ಸ್ಥಾನಮಾನ ಸೌಲಭ್ಯ ಹಾಗೂ ಅವಕಾಶಗಳಲ್ಲಿನ ತಾರತಮ್ಯ ತೊಡೆದು ಹಾಕಲು ಕಾರ್ಯಕ್ರಮ ರೂಪಿಸುವುದಕ್ಕೆ ಈ ಸಮೀಕ್ಷೆ ನೆರವಾಗಲಿದೆ.

No comments:

Post a Comment