Saturday 20 June 2015



    ಕುಡಿಯುವ ನೀರು ಸಮಸ್ಯೆ: ಕೈ ಪಂಪು ದುರಸ್ತಿ ಕ್ರಮ ಕೈಗೊಳ್ಳುವಂತೆ ಸೂಚನೆ
ಬೇಸಿಗೆಯಲ್ಲಿ ಕುಡಿಯುವ ನೀರಿಗೆ ಸಮಸ್ಯೆ ಆಗದಂತೆ, ಕೈಪಂಪು ದುರಸ್ತಿಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ರೋಹಿಣಿ ಸಿಂಧೂರಿ ಅವರು ತಿಳಿಸಿದರು.
 ಅವರು ಶನಿವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.
ಕುಡಿಯುವ ನೀರು ಸಮಸ್ಯೆ ಆಗದಂತೆ ಸರ್ಕಾರದಿಂದ ಬಿಡುಗಡೆಗೊಂಡ ಅನುದಾನವಾದ ಕ್ಯಾಪ್ ಹಾಗೂ ಟಾಸ್ಕ್ ಫೋರ್ಸ್ ಯೋಜನೆಯಡಿ ಕುಡಿಯುವ ನೀರಿಗೆ ತೊಂದರೆ ಇರುವ ಸಮಸ್ಯಾತ್ಮಕ ಗ್ರಾಮಗಳಲ್ಲಿ ಕುಡಿಯುವ ನೀರಿನ ಕಾಮಗಾರಿಗಳನ್ನು ಕೈಗೊಂಡು ಸಾರ್ವಜನಿಕರಿಗೆ ಕುಡಿಯುವ ನೀರನ್ನು ಒದಗಿಸಲಾಗುವುದು ಎಂದು ತಿಳಿಸಿದ ಅವರು ವಸತಿ ನಿಲಯಕ್ಕೆ ಪಡೆದಿರುವ ಬಾಡಿಗೆ ಕಟ್ಟಡದ ಪ್ರಸ್ತಾವನೆಯನ್ನು ಸರ್ಕಾರದ ಗಮನಕ್ಕೆ ತರಲಾಗುವುದು ಎಂದು ತಿಳಿಸಿದರು.
ಜಿಲ್ಲಾ ಪಂಚಾಯತ್ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ವಿ.ಮಂಜೇಗೌಡ ಮಾತನಾಡಿ, ವೈದ್ಯಾಧಿಕಾರಿಗಳ ಕೊರತೆ ಬಗ್ಗೆ ಸಭೆಯಲ್ಲಿ ಸದಸ್ಯರು ಮಾಹಿತಿ ನೀಡಿದ್ದು ಖಾಲಿ ಇರುವ ಕಡೆ ವೈದ್ಯರನ್ನು ನೀಡಲು ಅಗತ್ಯ ಕ್ರಮ ವಹಿಸುವಂತೆ ತಿಳಿಸಿದರು.
ಇದಕ್ಕೆ ಪ್ರತಿಕ್ರಿಯಿಸಿ ಮಾತನಾಡಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಮಂಜೇಗೌಡ ಅವರು ಹೊಸದಾಗಿ ನೇಮಕಾತಿಯಾಗಿರುವ ವೈದ್ಯಾಧಿಕಾರಿಗಳನ್ನು, ವೈದ್ಯಾಧಿಕಾರಿಗಳ ಕೊರತೆ ಇರುವ ಸ್ಥಳಕ್ಕೆ ನಿಯೋಜಿಸಲಾಗುತ್ತಿದೆ ಹಾಗೂ ಅಗತ್ಯವಿರುವ ಕಡೆ ವೈದ್ಯರನ್ನು ನೀಡಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸಭೆಯಲ್ಲಿ ಮಾಹಿತಿ ನೀಡಿದರು.
     ಸಭೆಯಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಲಲತಾ ಪ್ರಕಾಶ್ ಹಾಗೂ ಸ್ಥಾಯಿ ಸಮಿತಿ ಅಧ್ಯಕ್ಷರು, ಸದಸ್ಯರು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಜೂನ್ 21 ರಂದು ಅಂತಾರಾಷ್ಟ್ರೀಯ ಯೋಗ ಮತ್ತು ಸಂಗೀತ ದಿನಾಚರಣೆ
ನೆಹರು ಯುವ ಕೇಂದ್ರ, ಮಂಡ್ಯ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ,ಮಂಡ್ಯ, ಅನನ್ಯ ಹಾರ್ಟ್ ಟ್ರಸ್ಟ್, ಮಂಡ್ಯ ಜಾಗೃತಿ ಯುವತಿ ಮತ್ತು ಮಹಿಳಾ ಮಂಡ,ಗುತ್ತಲು ಹಾಗೂ ಜಿಲ್ಲಾ ಕಾರಾಗೃಹ ಇವರ ಸಹಯೋಗದೊಂದಿಗೆ ಜೂನ್21 ರಂದು ಬೆಳಿಗ್ಗೆ 8 ಗಂಟೆಗೆ ಮಂಡ್ಯ ಜಿಲ್ಲಾ ಕಾರಾಗೃಹದಲ್ಲಿ ಅಂತಾರಾಷ್ಟ್ರೀಯ ಯೋಗ ಮತ್ತು ಸಂಗೀತ ದಿನಾಚರಣೆಯನ್ನು ಏರ್ಪಡಿಸಲಾಗಿದೆ.
ಕರ್ನಾಟಕ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷರಾದ ಪಿ.ಎಂ. ಸೋಮಶೇಖರ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸುವರು. ಎಸ್.ಬಿ. ಎಜುಕೇಷನ್ ಟ್ರಸ್ಟ್‍ನ ನಿರ್ದೇಶಕರಾದ ಬಿ.ಶಿವಲಿಂಗಯ್ಯರವರು ಅಧ್ಯಕ್ಷತೆ ವಹಿಸುವರು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.


No comments:

Post a Comment